ಇ-ಶ್ರಮ್ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ

 ಕುಂದಾಪ್ರ ಡಾಟ್ ಕಾಂ ಸುದ್ದಿ.

ಉಡುಪಿ,ಜ.27: ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ಧಪಡಿಸಲು ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯವು ಇ-ಶ್ರಮ್ ಪೋರ್ಟಲ್ ಅಭಿವೃದ್ಧಿಪಡಿಸಿದ್ದು, ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಮಿಕರ ಹೆಸರು, ವೃತ್ತಿ, ವಿದ್ಯಾರ್ಹತೆ, ಕೌಶಲ್ಯದ ವಿಧ, ಕುಟುಂಬದ ವಿವರ, ಬ್ಯಾಂಕ್ ಖಾತೆ ಇತ್ಯಾದಿ ವಿವರಗಳನ್ನು ಇದು ಒಳಗೊಂಡಿರುತ್ತದೆ.

ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಯೋಜನೆಯಡಿ ನೋಂದಾಯಿಸಿ, ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರ ಗುರುತಿಸಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಸುಮಾರು 379 ವರ್ಗಗಳ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಣಿಯಾಗಬಹುದಾಗಿದೆ.

ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿ ಮಾಡುವ ವಿಧಾನ: 

16 ರಿಂದ 59 ವರ್ಷದೊಳಗಿನ, ಆದಾಯ ತೆರಿಗೆ ಪಾವತಿಸದೇ ಇರುವ, ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರದೇ ಇರುವ ಅಸಂಘಟಿತ ಕಾರ್ಮಿಕರು ಆಧಾರ್ ಕಾರ್ಡ್, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳೊಂದಿಗೆ ಈ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು 

ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದು ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿಯು ಉಚಿತವಾಗಿದ್ದು, ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದ್ದು, ಇದು ಜೀವಿತಾವಧಿಯ ಮಾನ್ಯತೆ ಹೊಂದಿರುತ್ತದೆ.

ನೊಂದಣಿಯ ಪ್ರಯೋಜನಗಳು: 

ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು, ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿ ಹಾಗೂ ಯೋಜನೆಗಳನ್ನು ರೂಪಿಸಲು, ಒಂದು ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ಪ್ರಯೋಜನ ಪಡೆಯಲು (ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂ. ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ. ಪರಿಹಾರ) ಹಾಗೂ ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19 ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ ಅರ್ಹ ಕಾರ್ಮಿಕರಿಗೆ ನೆರವು ನೀಡಲು ಈ ದತ್ತಾಂಶವನ್ನು ಬಳಸಿಕೊಳ್ಳಬಹುದಾಗಿದೆ. 

ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214, ಇ-ಶ್ರಮ್ ಸಹಾಯವಾಣಿ 14434 (ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದರಾತ್ರಿ 8 ರ ವರೆಗೆ) ಅಥವಾ ದೂರುಗಳನ್ನು ಸಲ್ಲಿಸಲು www.eshram.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.