ನೀಟ್ ಪರೀಕ್ಷಾ ಹಗರಣ: ನಿಷ್ಪಕ್ಷಪಾತ ತನಿಖೆಗೆ ಎನ್.ಎಸ್.ಯು.ಐನ ಅನೀಶ್ ಪೂಜಾರಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇಶಾದ್ಯಂತ ಮೇ.3ರಂದು ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಶ್ ಪೂಜಾರಿ ತೀವ್ರವಾಗಿ ಖಂಡಿಸಿದ್ದಾರೆ. 

ಈ ವರ್ಷ ಸುಮಾರು 22.5 ಲಕ್ಷ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸು ಹೊತ್ತು ಈ ಪರೀಕ್ಷೆಯನ್ನು ಬರೆದಿದ್ದರು. ಆದರೆ, ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪದೋಷಗಳಿಂದಾಗಿ ಇಡೀ ಪರೀಕ್ಷಾ ವ್ಯವಸ್ಥೆಯೇ ಕುಸಿದುಬಿದ್ದಿದೆ. ಕೇಂದ್ರ ಸರ್ಕಾರದ ಈ ವೈಫಲ್ಯವು ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ ಎಂದು ಅನೀಶ್ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಪದೇ ಪದೇ ಇಂತಹ ಹಗರಣಗಳು ನಡೆಯುತ್ತಿರುವುದು ಕೇಂದ್ರ ಸರ್ಕಾರದ ಅದಕ್ಷತೆಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಒಂದೆಡೆ ವಿದ್ಯಾರ್ಥಿಗಳು ಹಗಲಿರುಳು ಕಷ್ಟಪಟ್ಟು ಓದುತ್ತಿದ್ದರೆ, ಮತ್ತೊಂದೆಡೆ ವ್ಯವಸ್ಥಿತವಾಗಿ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡುವ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಹಗರಣದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಇಲ್ಲದಿದ್ದರೆ ಜಿಲ್ಲಾದ್ಯಂತ ಬೀದಿಗೆ ಇಳಿದು ಪ್ರತಿಭಟನೆ ನಡೆಸಲಿದ್ದೇವೆ ಎಂದು ಅವರು ಹೇಳಿದ್ದಾರೆ.